ಧರ್ಮಸ್ಥಳ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸರ್ಕಾರಕ್ಕೆ ವರ್ಷದ ಪೂರೈಸಿದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಧರ್ಮ ಸ್ಥಳಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದರ್ಶನ ಪ್ರಸಾದ ಸ್ವೀಕರಿಸಿದರು.

ಶನಿವಾರ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖಂಡರು ನಂತರ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಆಗಮಿಸಿದರು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿಎಂ ಹಾಗೂ ಡಿಸಿಎಂ ಅವರನ್ನು ಪೂರ್ಣಕುಂಭದೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವೀರೇಂದ್ರ ಹೆಗ್ಗಡೆ ಸಹೋದರ ಹರ್ಷೇಂದ್ರಕುಮಾ‌ರ್ ಕ್ಷೇತ್ರದ ಪರವಾಗಿ ಸ್ವಾಗತಿಸಿದರು.

ನಂತರ ಸಿಎಂ, ಡಿಸಿಎಂ ಹಾಗೂ ಇತರರು ಮುಖ್ಯದ್ವಾರದ ಮೂಲಕ ದೇವಾಲಯ ಪ್ರವೇಶಿಸಿದರು. ಸಿಎಂ ಸಿದ್ದರಾಮಯ್ಯ ದೇವಸ್ಥಾನ ಪ್ರವೇಶಿಸುತ್ತಿದ್ದಂತೆಯೇ ನೆರೆದಿದ್ದ ಭಕ್ತರು ಜೈ ಶ್ರೀರಾಮ್ ಜೈ ಶ್ರೀ ರಾಮ್ ಘೋಷಣೆ ಕೂಗಿದರು. ಜೊತೆಗೆ ಆಪ್ ಕಿ ಬಾರ್ ಮೋದಿ ಸರ್ಕಾರ್ ಎಂದು ಘೋಷಣೆ ಮೊಳಗಿತು. ಸಿಎಂ, ಡಿಸಿಎಂ ಅವರಿಗೆ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಥ್ ನೀಡಿದರು.

ಸಚಿವರಾದ ಬೈರತಿ ಸುರೇಶ್, ಎಚ್‌. ಸಿ. ಮಹದೇವಪ್ಪ, ಮತ್ತು ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವರಾದ ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಸೇರಿದಂತೆ ಹಲವರು ಜೊತೆಗಿದ್ದರು.