ಜೋಯಿಡಾ : ತಾಲೂಕಿನ ರಾಮನಗರದಲ್ಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಹಿನ್ನೆಲೆಯಲ್ಲಿ, ಕುಣಬಿ ಸಮುದಾಯದ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.

ಶಿವಾಜಿ ವೃತ್ತದಲ್ಲಿ ಪ್ರತಿಭಟಿಸಿ ಬಳಿಕ ಪೊಲೀಸ್ ಠಾಣೆಗೆ ಆಗಮಿಸಿದರು. ಸ್ಥಳೀಯ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೊಂಡಲ್ಕರ್ ಸಾವಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಮತ್ತು ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಈ ಪ್ರತಿಭಟನೆ ನಡೆಯಿತು.

ಭಾಸ್ಕರ್ ಬೊಂಡಲ್ಕರ್ ಈತನ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು,  ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು ಎನ್ನುವುದರ ಸಮಗ್ರ ತನಿಖೆ ಮಾಡಬೇಕು. ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಭಾಸ್ಕರ್  ನೀಡಿದ ಹೇಳಿಕೆಯಲ್ಲಿ ಪಿಎಸ್ಐ ಅವರ ದೌರ್ಜನ್ಯ ನಡೆದಿರುವುದನ್ನು ವಿವರಿಸಿದ್ದಾನೆ. ಈ ನಿಟ್ಟಿನಲ್ಲಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೂಕ್ತ ರೀತಿಯಲ್ಲಿ ತನಿಖೆಯನ್ನು ಕೈಗೊಳ್ಳಬೇಕು. ನ್ಯಾಯ ಸಿಗಬೇಕೆಂದರು

ಪ್ರತಿಭಟನೆಯಲ್ಲಿ ಭಾಗವಹಿಸಿದ ಕುಣಬಿ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ್ ಗಾವಡಾ ಮಾತನಾಡಿ,  ಭಾಸ್ಕರ್ ಬೊಂಡಲ್ಕರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಸಾವನ್ನಪ್ಪಿರುವ ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಕೂಡಲೇ ಅಮಾನತ್ತಿನಲ್ಲಿ ಇಡಬೇಕು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು.   ಮೃತ ಭಾಸ್ಕರನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೋಯಿಡಾ, ಕುಂಬಾರವಾಡ, ದಾಂಡೇಲಿ, ಜಗಲ್ಪೇಟ್, ರಾಮನಗರ ಮೊದಲಾದ ಪ್ರದೇಶಗಳ ಕುಣಬಿ ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.