ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಆಂಧ್ರ ಪ್ರದೇಶ(Andrapradesh) : ತಿರುಪತಿ ತಿರುಮಲ (Tirupati Tirumala) ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಏಳು ಭಕ್ತರು ಸಾವನ್ನಪ್ಪಿ ಹಲವು ಜನರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ದೇವಾಲಯದಲ್ಲಿ ವೈಕುಂಠ ಏಕಾದಶಿ(Vaikumta Ekadashi) ದರ್ಶನದ ವಿಶೇಷ ಟಿಕೆಟ್ ಪಡೆಯುವ ವೇಳೆ ಈ ದುರಂತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸೇರಿ ಸುಮಾರು ಏಳು ಭಕ್ತರು ಮೃತಪಟ್ಟಿದ್ದಾರೆ.
ಬುಧವಾರ ಸಂಜೆಯಿಂದಲೇ ವೈಕುಂಠ ಏಕಾದಶಿ ದರ್ಶನ ದ್ವಾರದ ವಿಶೇಷ ಟಿಕೆಟ್ ಪಡೆಯಲು ಅಲಿಪಿರಿ ಸೇರಿದಂತೆ ದೇವಾಲಯದ ವಿವಿಧ ಪ್ರದೇಶಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಅಪಾರ ಸಂಖ್ಯೆಯ ಭಕ್ತರನ್ನು ನಿಯಂತ್ರಿಸಲು ವಿಫಲವಾದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿದಂತೆ ಏಳು ಭಕ್ತರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಭಕ್ತರ ಗುರುತುಗಳು ಇನ್ನೂ ಸಹ ಪತ್ತೆಯಾಗಿಲ್ಲ.
ಕಾಲ್ತುಳಿತ ಸಂಭವಿಸಿದ ಹಿನ್ನಲೆಯಲ್ಲಿ ಟಿಕೆಟ್ ಹಂಚಿಕೆಯನ್ನು ಬಂದ್ ಮಾಡಲಾಗಿದೆ. ಸದ್ಯದ ಮಾಹಿತಿ ಪ್ರಕಾರ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಗುರುವಾರ ಮುಂಜಾನೆಯಿಂದ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಜನವರಿ 10 ರಿಂದ 19ರ ತನಕ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ದರ್ಶನದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಟಿಕೆಟ್ ಪಡೆಯಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ತಿರುಪತಿಯಲ್ಲಿ ಕಾದು ಕುಳಿತಿದ್ದರು. ಟಿಕೆಟ್ ನೀಡುವಾಗ ರಾತ್ರಿ ಕಾಲ್ತುಳಿತ ಸಂಭವಿಸಿದೆ.
ಘಟನೆಗೆ ಸಂಬಂಧಿಸಿ ಆಂಧ್ರಪ್ರದೇಶ ಮುಖ್ಯಮಂತ್ರಿ (Andrapradesha CM) ಚಂದ್ರಬಾಬು ನಾಯ್ಡು ಕಾಲ್ತುಳಿತ ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಬೇಕು, ಭಕ್ತರಿಗೆ ಸೂಕ್ತ ವ್ಯವಸ್ಥೆ ಮಾಡಿ, ಪರಿಹಾರ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಇದನ್ನು ಓದಿ : ರಾಜ್ಯದಲ್ಲಿ ನಕ್ಷಲರ ಹೋರಾಟ ಅಂತ್ಯ. ಸಿಎಂ ಮುಂದೆ ಆರು ನಕ್ಷಲರು ಶರಣು.