ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಕಲೆಕ್ಟ್ ಮಾಡುತ್ತಿದ್ದೀರಿ, ಇದು ಸರಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದಿರೀ ಎಂದು ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಭಾನುವಾರ ಕಾರವಾರದ ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇಲ್ಲಿ ರಸ್ತೆ ಮಾಡಲು ನಮ್ಮ ಜಾಗ ನೀಡಿದ್ದೇವೆ. ನೀರು ನೀಡಿದ್ದೀವಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ ,ರಸ್ತೆ ಕಾಮಗಾರಿ ಆರಂಭಿಸುವ ಮುನ್ನ ಇಲ್ಲಿ ಸಂಭವಿಸಬಹುದಾದ ಗುಡ್ಡ ಕುಸಿತದಂತಹ ಅನಾಹುತಗಳ ಬಗ್ಗೆ ವೈಜ್ಞಾನಿಕ ವರದಿ ಪಡೆದಿದ್ದಿರಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ರಾಷ್ಟಿಯ ಹೆದ್ದಾರಿ ಕಾಮಗಾರಿಗಳ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು, ರಾಜ್ಯ ಸರ್ಕಾರದಿಂದ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು.
ಪ್ರಸ್ತುತ ಜಿಯಾಜಿಕಲ್ ಸರ್ವೇ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ಕುರಿತ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪರಿಶೀಲಿಸಿ, ಹೆದ್ದಾರಿಯಾದ್ಯಂತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ವಿದ್ಯುತ್ ಕಂಬಗಳನ್ನು ಮತ್ತು ವಿದ್ಯುತ್ ಸಂಪರ್ಕ ಸಮಸ್ಯೆಯನ್ನು ಹೆಸ್ಕಾಂ ವತಿಯಿಂದ ತಕ್ಷಣ ಸರಿಪಡಿಸಬೇಕು. ಹೆಸ್ಕಾಂ ಅಧಿಕಾರಿಗಳು ಅಲರ್ಟ್ ಆಗಿದ್ದು, ತಕ್ಷಣ ಸ್ಪಂದಿಸಬೇಕು. ವಿದ್ಯುತ್ ಜನರೇಟ್ ಮಾಡುವ ಜಿಲ್ಲೆಯಾಗಿದ್ದು, ವಿಸ್ತೀರ್ಣ ಕೂಡಾ ದೊಡ್ಡದಾಗಿದ್ದು ಇಲ್ಲಿಗೆ ಹೆಚ್ಚಿನ ಸಿಬ್ಬಂದಿ ನೀಡಲಾಗುವುದು.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು , ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳನ್ನು ಗುರುತಿಸಿ, ಇಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿಯ ಕುರಿತಂತೆ ಶೀಘ್ರದಲ್ಲಿ ವರದಿ ಸಿದ್ದಪಡಿಸಿ, ಶೀಘ್ರದಲ್ಲಿ ಪರಿಹಾರ ಒಗದಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಳೆಯಿಂದಾಗಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದವರು ಪುನ: ತಮ್ಮ ಮನೆಗಳಿಗೆ ತೆರಳುವಾಗ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡುವಂತೆ ಕೋರಿದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಮನವಿಗೆ ,ಆಯ್ತು , ಈ ಬಗ್ಗೆ ನೋಡೋಣ ಎಂದು ಸಿಎಂ ಹೇಳಿದರು.
ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಮೂಲಕ ಪರಿಹಾರ ಒದಗಿಸುವ ಬಗ್ಗೆ ಶಾಸಕ ಸತೀಶ್ ಸೈಲ್ ಅವರು ಕೋರಿದರು. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ಎಂದು ಸಿಎಂ ಹೇಳಿದರು.
ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅತೀಕ್ , ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ , ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.